ಗೃಹಸಚಿವರ ತವರು ಕ್ಷೇತ್ರದಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೃಗವಧೆಯಲ್ಲಿ ಮಾರಣಾಂತಿಕ ಹಲ್ಲೆ
ಬೆಳ್ಳಂಬೆಳಗ್ಗೆ ಹೆಣವಾದ ಬೆಳ್ಳಿಕೊಡುಗೆ ರಾಜು

ತೀರ್ಥಹಳ್ಳಿ ತಾಲ್ಲೂಕಿನ ಮೃಗವಧೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳಿಕೊಡಿಗೆ ವಾಸಿ ರಾಜು (45) ಬೆಳ್ಳಂಬೆಳಗ್ಗೆ ಮನೆ ಮುಂಭಾಗದಲ್ಲಿ ಹೆಣವಾಗಿದ್ದಾರೆ. ಸಾಯುವ ಮುನ್ನ ರಾಜು ಮಾರಾಮಾರಿ ವಿಚಾರ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಂಡಿದ್ದು, ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ಬಹಿರಂಗವಾಗಬೇಕಾಗಿದೆ.

ರಾಜು ಮೂರು ದಿನಗಳಿಂದ ಮನೆಗೆ ಬಂದಿರಲ್ಲಿಲ್ಲ. ಸೋಮವಾರ ಬೆಳಿಗ್ಗೆ 6.30ರ ಸುಮಾರಿಗೆ ಮೂವರು ದುಷ್ಕರ್ಮಿಗಳು ಯದ್ವತದ್ವ ಹಲ್ಲೆ ಮಾಡಿ ಬೈಕಿನಲ್ಲಿ ಮನೆ ಮುಂಭಾಗ ತಂದು ಎಸೆದಿದ್ದಾರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಗಂಭೀರವಾಗಿ ಗಾಯಗೊಂಡ ರಾಜು ಜೋರಾಗಿ ಚೀರಾಟ ನಡೆಸಿದ್ದರಿಂದ ಸ್ಥಳೀಯರು ಮತ್ತು ಕುಟುಂಬ ಸದಸ್ಯರಿಗೆ ಮಾಹಿತಿ ತಿಳಿದಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿ ರಾಜು ಅವರನ್ನು ಆಸ್ಪತ್ರಗೆ ದಾಖಲಿಸುವ ಪ್ರಯತ್ನ ನಡೆಸಿದ್ದಾರೆ.

ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಬೆಳ್ಳಿಕೊಡುಗೆ ರಾಜು ಅವರಿಗೆ ನೀರು ಕುಡಿಸುವ ಪ್ರಯತ್ನ ನಡೆಸಿದ ಕುಟುಂಬ ಸದಸ್ಯರ ಮುಂದೆ ಶಿಶಿರ, ಶಿವು ಮತ್ತು ವಿಜಯೇಂದ್ರ ಎಂಬುವವರಿಂದ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಾಹಿತಿ ನೀಡಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಲ್ಲದೇ ಹಲ್ಲೆ ನಡೆಸಿದವರು ಬಾರೀ ಪ್ರಭಾವ ಬೀರುತ್ತಿದ್ದ ಪ್ರಕರಣ ಮುಚ್ಚು ಹಾಕುವ ಪ್ರಯತ್ನ ನಡೆದಿದೆ ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಗೃಹಸಚಿವರು ಮತ್ತು ಅವರ ಬೆಂಬಲಿಗರ ಸಹಾಯವನ್ನು ಹಲ್ಲೆ ನಡೆಸಿದವರು ಕೇಳಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಸಾರ್ವಜನಿಕವಾಗಿ ವ್ಯಕ್ತವಾಗುತ್ತಿದೆ.

ಬಡತನದಲ್ಲಿ ಜೀವನ ನಡೆಸಿದ್ದ ಮೃತ ಕುಟುಂಬದಲ್ಲಿ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಇಲ್ಲಸಲ್ಲದ ಭರವಸೆಗಳನ್ನು ನೀಡುವ ಪ್ರಯತ್ನ ನಡೆದಿದ್ದು, ಪ್ರಕರಣದ ದಿಕ್ಕು ತಪ್ಪಿಸುವ ಎಲ್ಲಾ ಸಾಧ್ಯತೆಗಳು ಕಂಡುಬರುತ್ತಿದೆ ಎಂದು ತಿಳಿದು ಬಂದಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post