ಮಹಿಳಾ ಸಬಲೀಕರಣಕ್ಕೆ ಆದ್ಯತೆ

ಕೊಡಚಾದ್ರಿ ಮಹಿಳಾ ಸೊಸೈಟಿಗೆ ₹ 39 ಲಕ್ಷ ಲಾಭ

ತೀರ್ಥಹಳ್ಳಿಯ ಕೊಡಚಾದ್ರಿ ಮಹಿಳಾ ಸೌಹಾರ್ದ ಪತ್ತಿನ ಸಹಕಾರ ನಿಯಮಿತ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹ ನೀಡುತ್ತಿದೆ. ಪ್ರಸ್ತುತ ಸಾಲಿನಲ್ಲಿ ₹ 15 ಕೋಟಿಗೂ ಹೆಚ್ಚು ವಹಿವಾಟು ನಡೆಸಿ ₹ 39 ಲಕ್ಷ ಲಾಭ ಗಳಿಸಿದೆ ಎಂದು ಅಧ್ಯಕ್ಷೆ ಚೇತನಾ ಶ್ರೀಕಾಂತ್ ಹೆಗ್ಡೆ ತಿಳಿಸಿದರು.

ಅಡಿಕೆ ಹಾಳೆ ತಯಾರಿಕಾ ಘಟಕ, ಕೇಟರಿಂಗ್, ಹೋಟೆಲ್ ಉದ್ಯಮ, ಟೈಲರಿಂಗ್, ಮಹಿಳೆಯರ ಪಿಜಿ, ಹೋಳಿಗೆ ರೊಟ್ಟಿ ತಯಾರಿಕಾ ಘಟಕ, ಬ್ಯಾಂಗಲ್ ಸ್ಟೋರ್, ಬೇಕರಿ, ಬ್ಯೂಟಿಪಾರ್ಲರ್, ಬಟ್ಟೆ ಅಂಗಡಿ ಇನ್ನಿತರ ಉದ್ಯಮಕ್ಕಾಗಿ ಗರಿಷ್ಠ ₹ 30 ಲಕ್ಷದವರೆಗೆ ಸಾಲ ಸೌಲಭ್ಯ ನೀಡಿದೆ. ಸಾಲ ಪಡೆದು ಆರ್ಥಿಕ ಸ್ವಾವಲಂಬನೆ ಹೊಂದಿದ ಮಹಿಳೆಯರನ್ನು ಗುರುತಿಸಿ ಗೌರವಿಸಲಾಗಿದೆ ಎಂದು ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

3 ಸಾವಿರ ಸದಸ್ಯರಿಂದ 2014ರಲ್ಲಿ ಆರಂಭಗೊಂಡ ಸಂಸ್ಥೆ ಸದೃಢವಾಗಿ ಬೆಳೆಯುತ್ತಿದೆ. ಸ್ವಂತ ಕಟ್ಟಡಕ್ಕಾಗಿ ಕಟ್ಟಡ ನಿಧಿ ಆರಂಭಿಸಲಾಗಿದೆ. ಸದ್ಯ ಜಿಲ್ಲೆಯಾದ್ಯಂತ 5,260 ಮಹಿಳಾ ಸದಸ್ಯರನ್ನು ಹೊಂದಿದ್ದು, ಸದಸ್ಯರಿಗೆ ₹ 5 ಲಕ್ಷದವರೆಗೆ ವಾಹನ ಸಾಲ ನೀಡಲಾಗುತ್ತಿದೆ. ಬಿಪಿಎಲ್ ಷೇರುದಾರ ಕುಟುಂಬದ ಸದಸ್ಯರು ಮರಣ ಹೊಂದಿದರೆ ತಲಾ ₹ 5,000 ಸಹಾಯ ಧನ ನೀಡುವ ಮೂಲಕ ಧೈರ್ಯ ತುಂಬಲಾಗುತ್ತಿದೆ ಎಂದು ಹೇಳಿದರು.

ಉಪಾಧ್ಯಕ್ಷೆ ಶಶಿಕಲಾ ಶೆಟ್ಟಿ, ನಿರ್ದೇಶಕರಾದ ಅಚಲ ಹೆಗಡೆ, ಮೈಥಿಲಿ ಸತೀಶ್, ವಿನೋದ ಕಷ್ಣಮೂರ್ತಿ, ಫರ್ಜಾನಾ ಖಾನಂ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿತಾ ಇದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post