ತೀರ್ಥಹಳ್ಳಿ ಮೂಲದ ಸಬ್ ಇನ್ಸ್ಪೆಕ್ಟರ್ ಸಚಿನ್ ಸಾವು
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ಹೆಗ್ಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ಭಾನುವಾರ ಬೆಳಿಗ್ಗೆ ಕಾರು ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್ಪೆಕ್ಟರ್ಗಳು (ಆರ್ಎಸ್ಐ) ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಸಬ್ ಇನ್ಸ್ಪೆಕ್ಟರ್ಗಳು ತೀವ್ರವಾಗಿ ಗಾಯಗೊಂಡಿದ್ದಾರೆ.
ಆರ್ಎಸ್ಐಗಳಾದ ಮಂಜುನಾಥ್, ಅಂಬರೀಷ್, ಸಚಿನ್ ಮೃತಪಟ್ಟಿದ್ದಾರೆ. ಸಬ್ ಇನ್ಸ್ಪೆಕ್ಟರ್ಗಳಾದ ಈಶ್ವರ್, ಮಹಾಂತೇಶ್ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಚಿನ್ (30) ತೀರ್ಥಹಳ್ಳಿ ತಾಲ್ಲೂಕಿನ ಬಿಸಿಲುಮನೆ ಗ್ರಾಮದ ವೆಂಕಟೇಶ್ ಮತ್ತು ಗುಲಾಬಿ ದಂಪತಿಯ ಪುತ್ರ. ಮೇ 10 ರಂದು ಸಚಿನ್ ಮದುವೆ ನಿಗಧಿಯಾಗಿತ್ತು. ತಂದೆ ಕೂಡ ಕಳೆದ ವರ್ಷ ಅಪಘಾತದಲ್ಲಿ ಮೃತಪಟ್ಟಿದ್ದರು.
ಪೊಲೀಸ್ ಸಿಬ್ಬಂದಿ ಬೆಂಗಳೂರಿಂದ ಬಳ್ಳಾರಿಗೆ ತೆರಳುವ ವೇಳೆ ಹೆಗ್ಗೆರೆ ಬಳಿ ಎದುರಿನಿಂದ ಬಂದ ಲಾರಿಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.
ಘಟನೆಯ ನಂತರ 2 ಗಂಟೆಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಅಪಘಾತ ಸ್ಥಳ ಹಿರಿಯೂರು ತಾಲ್ಲೂಕು ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದ್ದು ಇಲ್ಲಿಯೇ ಪ್ರಕರಣ ದಾಖಲಾಗಿದೆ.